ಲಂಚ ಸ್ವೀಕಾರ, ಕಂದಾಯ ನಿರೀಕ್ಷಕ ಲೋಕಾಯುಕ್ತ ಪೊಲೀಸ್ ಬಲೆಗೆ
Thursday, December 19, 2024
ಮಂಗಳೂರು :ಆಸ್ತಿಯ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮುಲ್ಕಿಯ ಕಂದಾಯ ನಿರೀಕ್ಷಕ ದಿನೇಶ್ ರವರನ್ನು ಲೋಕಾಯುಕ್ತ ಪೊಲೀಸರು ಹಣ ಸಮೇತ ರೆಡ್ ಹ್ಯಾಂಡಾಗಿ ಹಿಡಿದು ಪ್ರಕರಣ ದಾಖಲಿಸಿದ್ದಾರೆ.
ದೂರುದಾರ ರವರ ಅಜ್ಜಿ ಪದ್ಮಾವತಿರವರು ಮೃತಪಟ್ಟ ಕಾರಣ ಅವರ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡುವ ಸಲುವಾಗಿ ದೂರುದಾರರು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ ರವರ ಕಚೇರಿಗೆ ಅರ್ಜಿ ಸಲ್ಲಿಸಿದ್ದು, ಸದರಿ ಅರ್ಜಿಯು ಮುಲ್ಕಿ ಕಂದಾಯ ನಿರೀಕ್ಷಕರ ಕಚೇರಿಗೆ ವಿಚಾರಣೆಗಾಗಿ ಕಳುಹಿಸಿದ್ದರು.
ಮುಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ರವರು ಒಂದು ವರ್ಷಕ್ಕಿಂತ ಹೆಚ್ಚು ಕಾಲ ಯಾವುದೇ ಕ್ರಮ ಕೈಗೊಳ್ಳದೇ ಕಡತವನ್ನು ಬಾಕಿ ಇರಿಸಿಕೊಂಡಿದ್ದರು.
ಈ ಬಗ್ಗೆ ದೂರುದಾರರು ಡಿ.9 ರಂದು ರಂದು ಅರ್ಜಿಯ ಬಗ್ಗೆ ಕಂದಾಯ ನಿರೀಕ್ಷಕರ ಕಛೇರಿಗೆ ಹೋಗಿ ವಿಚಾರಿಸಲಾಗಿ ಮುಲ್ಕಿ ಕಂದಾಯ ನಿರೀಕ್ಷಕರಾದ ಜಿ.ಎಸ್ ದಿನೇಶ್ ರವರು ಆಸ್ತಿಗೆ ಸಂಬಂಧಿಸಿದ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡಲು ರೂ 4 ಲಕ್ಷ ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಆದರೆ ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಚ್ಛೆ ಇಲ್ಲದ ಕಾರಣ ದೂರುದಾರರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು
ಡಿಸೆಂಬರ್ 19 ಬೆಳಿಗ್ಗೆ ಮುಲ್ಕಿಯ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ರವರು ದೂರುದಾರರಿಂದ ರೂ. 4 ಲಕ್ಷ ಲಂಚದ ಹಣವನ್ನು ಸ್ವೀಕರಿಸುವಾಗ ಸುರತ್ಕಲ್ ಜಂಕ್ಷನ್ ಬಳಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ
ಕೂಡಲೇ ಲೋಕಾಯುಕ್ತರು ಅಧಿಕಾರಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.
ಕಾರ್ಯಾಚರಣೆಯಲ್ಲಿ ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ,ನಟರಾಜ್ ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ॥ ಗಾನ ಪಿ ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ.ಎ, ಸುರೇಶ್ ಕುಮಾರ್ ಪಿ, ಚಂದ್ರಶೇಖರ್ ಕೆ.ಎನ್ ಇವರು ಸಿಬ್ಬಂದಿಗಳ ಜೊತೆ ಟ್ರಾಪ್ ಕಾರ್ಯಾಚರಣೆ ಕೈಗೊಂಡಿರುತ್ತಾರೆ.