ಹೊಸ ಅಂಗಣ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ
Monday, July 28, 2025
ಮೂಲ್ಕಿ:ಧಾರ್ಮಿಕ ಕ್ಷೇತ್ರಗಳ ಅಭಿವೃದ್ದಿಯಲ್ಲಿ ಅರ್ಚಕರ ಪಾತ್ರ ಮಹತ್ತರದಾಗಿದ್ದು, ದೇವರ ಮತ್ತು ಭಕ್ತರ ನಡುವೆ ಕೊಂಡಿಯಾಗಿ ಕಾರ್ಯ ನಿರ್ವಹಿಸುವ ತೆರೆ ಮರೆಯ ಅರ್ಚಕರನ್ನು ಗುರುತಿಸಿ ಗೌರವಿಸುವ ಕಾರ್ಯ ಅಭಿನಂದನೀಯ ಎಂದು ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಅನುವಂಶಿಕ ಮೊಕ್ತೇಸರ ಅಪ್ಪು ಯಾನೆ ಶ್ರೀನಿವಾಸ ಪೂಜಾರಿ ಹೇಳಿದರು.ಮೂಲ್ಕಿಯ ಹೊಸ ಅಂಗಣ ಮಾಸ ಪತ್ರಿಕೆಯ ಆಶ್ರಯದಲ್ಲಿ ಮೂಲ್ಕಿಯ ಪುನರೂರು ಟೂರಿಸ್ಟ್ ಹೋಂ ನ ಸಭಾಂಗಣದಲ್ಲಿ ಜರಗಿದ ಹೊಸ ಅಂಗಣ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಅವರು ಯಾವುದೇ ಫಲಾಪೇಕ್ಷೆಯಿಲ್ಲದೆ ಸೇವೆ ಸಲ್ಲಿಸುತ್ತಿರುವ ಅರ್ಚಕರು ಸಮಾಜದ ಆಸ್ತಿಯಾಗಿದ್ದು ಅವರನ್ನು ಗುರುತಿಸಿ ಗೌರವಿಸುವ ಕಾರ್ಯ ಶ್ಲಾಘನೀಯ ಎಂದರು. ಕಾರ್ಯಕ್ರಮದಲ್ಲಿ ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕ ಅಪ್ಪು ಯಾನೆ ಶ್ರೀನಿವಾಸ ಪೂಜಾರಿಯವರನ್ನು ಗೌರವಿಸಲಾಯಿತು.
ಈ ಸಂದರ್ಭ ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್,ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಅಡಳಿತ ಸಮಿತಿ ಅಧ್ಯಕ್ಷ ವಾಮನ್ ಇಡ್ಯಾ,ಬಿರುವೆರ್ ಕುಡ್ಲ ಮೂಲ್ಕಿ ಘಟಕದ ಅಧ್ಯಕ್ಷ ಉಮೇಶ್ ಮಾನಂಪಾಡಿ,ಕಥಾ ಬಿಂದುವಿನ ಪಿ ವಿ ಪ್ರದೀಪ್ ಕುಮಾರ್,ತೋಕೂರು ರಾಮಣ್ಣ ಶೆಟ್ಟಿ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪುಷ್ಪರಾಜ್ ಚೌಟ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್,ಶ್ರೀ ಕೇಶಾವನಂದ ಗುರೂಜಿ,ಜೋನ್ ಕ್ವಾಡ್ರಸ್, ವಾಸು ಪೂಜಾರಿಚಿತ್ರಾಪು,ಹಬೀಬುಲ್ಲಾ,ಎ,ಜಯಪಾಲ ಶೆಟ್ಟಿ,ರವಿಚಂದ್ರ ಮತ್ತಿತರರಿದ್ದರು.ಹೊಸ ಅಂಗಣ ಮಾಸ ಪತ್ರಿಕೆಯ ಸಂಪಾದಕ ಹರೀಶ್ಚಂದ್ರ ಪಿ ಸಾಲ್ಯಾನ್ ಸ್ವಾಗತಿಸಿದರು.ದಿನೇಶ್ ಶೆಟ್ಟಿ ವಂದಿಸಿದರು.ವ್ಯೆ ಎನ್ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು.