ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನೃತ್ಯ ತರಗತಿ ಉದ್ಘಾಟನೆ
ಕಿನ್ನಿಗೋಳಿ: ಇಂದಿನ ಕಾಲಘಟ್ಟದಲ್ಲಿ ಮಕ್ಕಳಿಗೆ ಶೈಕ್ಷಣಿಕ ವಿದ್ಯಾಭ್ಯಾಸದ ಜೊತೆಗೆ ನೃತ್ಯದಂತಹ ಕಲಾ ಪ್ರಾಕಾರಗಳೂ ಅಗತ್ಯವಾಗಿವೆ. ನೃತ್ಯವು ಮಕ್ಕಳ ಮಾನಸಿಕ ಸ್ಥಿರತೆಯನ್ನು ಕಾಪಾಡುವುದರ ಜೊತೆಗೆ ಆತ್ಮವಿಶ್ವಾಸ, ಶಿಸ್ತು ,ದೈಹಿಕ ಮತ್ತು ಮಾನಸಿಕ ಸ್ಥಿರತೆಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ಕಿನ್ನಿಗೋಳಿ ಪಟ್ಟಣ ಪಂಚಾಯತ್ ನ ಅಧ್ಯಕ್ಷ ಗುರುರಾಜ್ ಮಲ್ಲಿಗೆಯಂಗಡಿ ಹೇಳಿದರು.ಅವರು ಜೂ.10ರಂದು ಕಿನ್ನಿಗೋಳಿಯ
ರೋಟರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನೃತ್ಯ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವತಿಯಿಂದ ಏಕಬಳಕೆ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಿ ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.
ಕಿನ್ನಿಗೋಳಿ ರೋಟರಿ ಕ್ಲಬ್ ನ ಹಿರಿಯ ಸದಸ್ಯ ರೋ. ಸತೀಶ್ ಚಂದ್ರ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರೋಟರಿ ಸಂಸ್ಥೆಯು ಕಳೆದ 39 ವರ್ಷಗಳಿಂದ ಈ ವಿದ್ಯಾಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿರುವ ಬಗ್ಗೆ ವಿವರಿಸಿದರು. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವ ವಿವಿಧ ಪಠ್ಯೇತರ ಚಟುವಟಿಕೆಗಳನ್ನು ಸಂಸ್ಥೆ ನಿರಂತರವಾಗಿ ಹಮ್ಮಿಕೊಳ್ಳುತ್ತಿದೆ ಎಂದರು.
ಈ ಸಂದರ್ಭ ರೋ. ಪ್ರವೀಣ್ ಸಾಲ್ಯಾನ್, ರೋ. ಹರೀಶ್ ಶೆಟ್ಟಿ, ಆಡಳಿತಾಧಿಕಾರಿ ಭರತ್ ಕುಮಾರ್ ಹಾಗೂ ನೃತ್ಯ ತರಬೇತುದಾರ ಬಬಿತಾ ನರೇಶ್ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಸುನಿತಾ ಗುರುರಾಜ್ ಸ್ವಾಗತಿಸಿ, ಶುಭಲಕ್ಷ್ಮಿ ವಂದನಾರ್ಪಣೆಗೈ ದು, ಶಿಕ್ಷಕಿ ಪ್ರತಿಮ ಕಾರ್ಯಕ್ರಮ ನಿರೂಪಿಸಿದರು.